ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ ಇದೇ ಸೆ.15 ರಿಂದ 45 ದಿನಗಳ ಕಾಲ ನಡೆಯಲಿದ್ದು, ವ್ಯವಸ್ಥಿತವಾಗಿ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಸೂಚನೆ ನೀಡಿದ್ದಾರೆ. ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, 45 ದಿನಗಳ ಕಾಲ ನಡೆಯುವ ಸಮೀಕ್ಷೆಯಲ್ಲಿ ಸರ್ಕಾರಿ ತಾಲೂಕಾ ಆಸ್ಪತ್ರೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಮತ್ತು ಶಿಶು ಅಭಿವೃದಿ ಯೋಜನಾ ಕಚೇರಿಗಳಲ್ಲಿ ಮಾಜಿ ದೇವದಾಸಿ ಮಹಿಳೆಯರ ಸಮೀಕ್ಷೆಯನ್ನು ವ್ಯವಸ್ಥಿತವಾಗಿ ಕೈಗೊಂಡು ಸಮೀಕ್ಷಾ ಕಾರ್ಯ ಯಶಸ್ವಿಗೊಳಿಸಬೇಕೆಂದು ಹೇಳಿದರು.

ಇದೆ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸಮೀಕ್ಷೆ ಕಾರ್ಯದ ಪೋಸ್ಟರ್ಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಮೊದಲ ಬಾರಿಗೆ ರಾಜ್ಯದಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿ ಮಹಿಳೆಯರ ಸಾಮಾಜಿಕ, ಆರ್ಥಿಕ ಸ್ಥಿತಿಗತಿಗಳ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ ಪುರ್ನವಸತಿ ಕಲ್ಪಿಸಲು ಸಮೀಕ್ಷೆ ನಡೆಸಲಾಗುತ್ತಿದೆ. ಈ ಎರಡು ಸಮೀಕ್ಷೆಗಳನ್ನು ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ನಡೆಸಲಾಗುವುದು. ಸಮೀಕ್ಷೆ ಕಾರ್ಯ ಕೈಗೊಳ್ಳಲು ಈಗಾಗಲೇ ಪೂರ್ವತಯಾರಿ ಮಾಡಿಕೊಂಡಿದ್ದು, ಮೊಬೈಲ್ ಆಪ್ ಮೂಲಕ ಟ್ರಾನ್ಸಜೆಂಡರ್ ಸಮೀಕ್ಷೆಗೆ “KARMANI Web Application ಅನ್ನು ಹಾಗೂ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯನ್ನು ಸೇವಾ ಸಿಂಧು ವೆಬ್ ಅಪ್ಲಿಕೇಶನ್ ಮೂಲಕ ಪ್ರತ್ಯೇಕವಾಗಿ ಎರಡು ಸಮೀಕ್ಷೆಗಳನ್ನು ಕೈಗೊಳ್ಳಲಾಗುತ್ತದೆ. ಲಿಂಗತ್ವ ಅಲ್ಪಸಂಖ್ಯಾತರ ಮೂಲಹಂತದ ಸಮೀಕ್ಷೆಯನ್ನು ಜಿಲ್ಲೆಯ ಇಂಡಿ, ಸಿಂದಗಿ,ಮುದ್ದೇಬಿಹಾಳ, ಬಸವನ ಬಾಗೇವಾಡಿ ತಾಲೂಕಾ ಆಸ್ಪತ್ರೆಗಳಲ್ಲಿ ಹಾಗೂ ಜಿಲ್ಲಾ ಆಸ್ಪತ್ರೆ ವಿಜಯಪುರದಲ್ಲಿ ನಡೆಸಲಾಗುತ್ತದೆ. ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯನ್ನು ಜಿಲ್ಲೆಯ 07 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ನಡೆಸಲಾಗುತ್ತದೆ. ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆಯನ್ನು ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರ ಮೂಲಕವೇ ಸಮೀಕ್ಷೆ ಕೈಗೊಳ್ಳುತ್ತಿರುವುದು ವಿಶೇಷವಾಗಿದೆ. ಮಾಜಿ ದೇವದಸಿ ಮಹಿಳೆಯರ ಮರು ಸಮೀಕ್ಷೆಯನ್ನು ಕೈಗೊಳ್ಳಲು ಗುರುತಿಸಲಾದ ಸಮೀಕ್ಷೆದಾರರಿಗೆ ಹಾಗೂ ದೇವದಾಸಿ ಪುರ್ನವಸತಿ ಯೋಜನಾ ಘಟಕದ ಅಧಿಕಾರಿ-ಸಿಬ್ಬಂದಿಗಳು ಸಮೀಕ್ಷೆಗಳನ್ನು ಕೈಗೊಳ್ಳಲಿದ್ದು, ಎಲ್ಲರೂ ಸಕ್ರೀಯವಾಗಿ ಸಮೀಕ್ಷೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು. ಈ ಎರಡು ಶೋಷಿತ ಸಮುದಾಯದ ಪ್ರತಿಯೊಬ್ಬರು ಸಮೀಕ್ಷೆಗೊಳಪಡಿಸಲು ಎಲ್ಲರೂ ಕೈ ಜೋಡಿಸಬೇಕೆಂದರು.




