ವಿಜಯಪುರ ನಗರದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಜಿಲ್ಲಾ ಕಾರ್ಯಾಲಯದಲ್ಲಿ ಇಂದು ‘ಪಂಡಿತ್ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ’ದ ಅಂಗವಾಗಿ ಜಿಲ್ಲಾ ಮಟ್ಟದ ಯೋಜನಾ ಸಭೆಯು ಯಶಸ್ವಿಯಾಗಿ ಜರುಗಿತು.
ಹಿರಿಯ ಮುಖಂಡರಾದ ಶ್ರೀ ಎಸ್.ಕೆ. ಬೆಳ್ಳುಬ್ಬಿ ಅವರು ಸುಶ್ರಾವ್ಯವಾಗಿ ‘ವರ್ಗ ಗೀತೆ’ಯನ್ನು ಹಾಡುವ ಮೂಲಕ ಈ ಮಹತ್ವದ ಸಭೆಗೆ ವಿದ್ಯುಕ್ತ ಚಾಲನೆ ನೀಡಿದರು.
ಸಭೆಯನ್ನುದ್ದೇಶಿಸಿ ಬಿಜೆಪಿ ಮುಖಂಡರಾದ ಚಂದ್ರಶೇಖರ ಕವಟಗಿಯವರು, ಪಕ್ಷದ ಸೈದ್ಧಾಂತಿಕ ನೆಲೆಗಟ್ಟಿನ ಕುರಿತು ಆಳವಾದ ವಿಚಾರಗಳನ್ನು ಹಂಚಿಕೊಂಡರು. ಭಾರತೀಯ ಜನತಾ ಪಾರ್ಟಿಯ ಸೈದ್ಧಾಂತಿಕ ಹಿನ್ನೆಲೆ ಹಾಗೂ ಪಂಡಿತ್ ದೀನದಯಾಳ ಉಪಾಧ್ಯಾಯರು ಪ್ರತಿಪಾದಿಸಿದ ‘ಏಕಾತ್ಮ ಮಾನವ ದರ್ಶನ’ ಸಿದ್ಧಾಂತದ ಮಹತ್ವವನ್ನು ಅವರು ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಟ್ಟರು. ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನಲ್ಲೂ ಸೈದ್ಧಾಂತಿಕ ಸ್ಪಷ್ಟತೆ ಮೂಡಿಸುವುದು ಮತ್ತು ಸಂಘಟನಾತ್ಮಕ ಕೌಶಲ್ಯಗಳನ್ನು ಬಲಪಡಿಸುವುದು ಈ ಪ್ರಶಿಕ್ಷಣ ವರ್ಗದ ಪ್ರಮುಖ ಉದ್ದೇಶವಾಗಿದೆ. ರಾಜ್ಯದಾದ್ಯಂತ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳನ್ನು ಇನ್ನಷ್ಟು ಚುರುಕುಗೊಳಿಸಲು ದೊಡ್ಡ ಪ್ರಮಾಣದಲ್ಲಿ ತರಬೇತಿ ಶಿಬಿರಗಳನ್ನು ಆಯೋಜಿಸುವ ಅಗತ್ಯತೆಯ ಕುರಿತು ಚರ್ಚಿಸಲಾಯಿತು. ಮುಂಬರುವ ದಿನಗಳಲ್ಲಿ ನಡೆಯಲಿರುವ ಮಂಡಲ ಮಟ್ಟದ ಪ್ರಶಿಕ್ಷಣ ವರ್ಗಗಳ ಸಂಪೂರ್ಣ ವಿವರ, ರೂಪುರೇಷೆ ಹಾಗೂ ಜವಾಬ್ದಾರಿಗಳ ಕುರಿತು ಸಭೆಯಲ್ಲಿ ಎಳೆಎಳೆಯಾಗಿ ವಿವರಿಸಲಾಯಿತು. ಪಕ್ಷವನ್ನು ತಳಮಟ್ಟದಿಂದಲೇ ಗಟ್ಟಿಗೊಳಿಸಲು ಈ ಪ್ರಶಿಕ್ಷಣ ಮಹಾಭಿಯಾನವು ಪ್ರಮುಖ ಪಾತ್ರ ವಹಿಸಲಿದೆ ಎಂದು ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತವಾಯಿತು.
ಸಭೆಯಲ್ಲಿ ಗುರುಲಿಂಗಪ್ಪ ಅಂಗಡಿ ಮಾತನಾಡಿ ಎಲ್ಲ ಮಂಡಲಗಳಲ್ಲಿ ಪ್ರಶಿಕ್ಷಣ ವರ್ಗಗಳು ಜರುಗಲಿದ್ದು ರಾಜ್ಯ ಮಟ್ಟದ ಭಾಷಣಕಾರರು ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಎಸ.ಕೆ ಬೆಳ್ಳುಬ್ಬಿ, ಮಾಜಿ ಶಾಸಕರಾದ ರಮೇಶ ಭೂಸನೂರ, ಪ್ರಮುಖರಾದ ಉಮೇಶ ಕಾರಜೋಳ, ಚಂದ್ರಶೇಖರ ಕವಟಗಿ, ಸಂಜಯಪಾಟೀಲ ಕನಮಡಿ, ಅನೀಲ ಜಮಾದಾರ, ಮಳುಗೌಡ ಪಾಟೀಲ, ಈರಣ್ಣ ರಾವೂರ, ಸಾಬು ಮಾಶ್ಯಾಳ, ಚಿದಾನಂದ ಚಲವಾದಿ, ಸ್ವಪ್ನಾ ಕಣಮುಚನಾಳ, ರಾಜೇಶ ತಾವಸೆ ಜಿಲ್ಲಾ ಮಟ್ಟದ ಪದಾಧಿಕಾರಿಗಳು, ಮಂಡಲಗಳ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



